ಮೇ. 28ಕ್ಕೆ ‘ಅಮೃತ ಭಾರತಿಗೆ ಕನ್ನಡದ ಆರತಿ’ ಕಾರ್ಯಕ್ರಮ
ಅರ್ಥಪೂರ್ಣ ಆಚರಣೆಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳುಚಂತೆ ಡಿ.ಸಿ. ಯಶವಂತ ವಿ. ಗುರುಕರ್ ಸೂಚನೆ
ಕಲಬುರಗಿ, ಸ್ವಾತಂತ್ರ್ಯ ಸಂಗ್ರಾಮದ ಕುರಿತು ಮೆಲಕು ಹಾಕುವ ಮತ್ತು ಯುವ ಜನಾಂಗಕ್ಕೆ ತಿಳಿಸುವ ಉದ್ದೇಶದಿಂದ ಸ್ವಾತಂತ್ರ್ಯದ ಅಮೃತ ಮಹೋತ್ಸವ ಅಂಗವಾಗಿ ಅಮೃತ ಭಾರತಿಗೆ ಕನ್ನಡದ ಆರತಿ ಶೀರ್ಷಿಕೆಯಡಿ ಇದೇ ಮೇ 28 ರಂದು ಕಲಬುರಗಿ ಮತ್ತು ಸೇಡಂ ತಾಲೂಕಿನ ಮುಧೋಳ ಗ್ರಾಮದಲ್ಲಿ ದೇಶಭಕ್ತಿಯ ಸಾಂಸ್ಕøತಿಕ ಕಾರ್ಯಕ್ರಮ ಆಯೋಜಿಸಲಾಗಿದೆ. ಅರ್ಥಪೂರ್ಣ ಆಚರಣೆಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಡಿ.ಸಿ. ಯಶವಂತ ವಿ. ಗುರುಕರ್ ಸೂಚಿಸಿದರು.
ಮಂಗಳವಾರ ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಈ ಕುರಿತಂತೆ ಅಧಿಕಾರಿಗಳೊಂದಿಗೆ ಪೂರ್ವಸಿದ್ಧತಾ ಸಭೆ ನಡೆಸಿದ ಅವರು ವೀರ್ ಸಾವರ್ಕರ್ ಜನ್ಮ ದಿನದ ನಿಮಿತ್ಯ ಮೊದಲ ಹಂತವಾಗಿ ಮೇ.28 ರಂದು ರಾಜ್ಯದಾದ್ಯಂತ ಏಕಕಾಲದಲ್ಲಿ 75 ಸ್ಥಳಗಳಲ್ಲಿ ಈ ಕಾರ್ಯಕ್ರಮ ಜರುಗಲಿದೆ. ಕಲಬುರಗಿ ಜಿಲ್ಲೆಯಲ್ಲಿ ಕಲಬುರಗಿ ಮತ್ತು ಮುಧೋಳದಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ ಎಂದರು.

ಕಲಾವಿದರ ಆಯ್ಕೆಗೆ ರಂಗಾಯಣ ನಿರ್ದೇಶಕ ಪ್ರಭಾಕರ ಜೋಷಿ ನೇತೃತ್ವದಲ್ಲಿ ಸಮಿತಿ ರಚಿಸಲಾಗುವುದು. ಸಮಿತಿ ವಿವಿಧ ಸಂಘ-ಸಂಸ್ಥೆಗಳೊಂದಿಗೆ ಚರ್ಚಿಸಿ ಅಂತಿಮಗೊಳಿಸಬೇಕು. ಉಳಿದಂತೆ ಇತರೆ ಕಾರ್ಯಗಳಿಗೆ ಇಲಾಖಾವಾರು ಅಧಿಕಾರಿಗಳಿಗೆ ಜವಾಬ್ದಾರಿ ವಹಿಸಬೇಕು. ಜವಾಬ್ದಾರಿ ಪಡೆದ ಅಧಿಕಾರಿಗಳು ಕಾರ್ಯಕ್ರಮ ಯಶಸ್ಸಿಗೆ ಕಾರ್ಯನಿರ್ವಹಿಸಬೇಕು ಎಂದರು.
ರಾಷ್ಟ್ರದ ಸ್ವಾತಂತ್ರ್ಯ ಸಂಗ್ರಾಮದ ನೆನಪುಗಳನ್ನು ಮೆಲಕು ಹಾಕುತ್ತಾ ಸ್ವಾತಂತ್ರ್ಯಕ್ಕಾಗಿ ಹೋರಾಡಿ ಜೀವನವನ್ನೇ ತ್ಯಾಗ ಮಾಡಿದ ಹೋರಾಟಗಾರರ ಜೀವನಗಾಥೆ, ಹೋರಾಟದ ವಿವಿಧ ಹಂತಗಳನ್ನು ವಿಶೇಷವಾಗಿ ಸ್ವಾತಂತ್ರ್ಯ ಹೋರಾಟಕ್ಕೆ ಕರ್ನಾಟಕದ ಕೊಡುಗೆಯನ್ನು ಯುವ ಜನಾಂಗಕ್ಕೆ ಹಾಗೂ ಸಾರ್ವಜನಿಕರಿಗೆ ತಿಳಿಪಡಿಸುವ ಉದ್ದೇಶದಿಂದ ರಾಜ್ಯ ಸರಕಾರ ವಿಭಿನ್ನವಾದ ಕಾರ್ಯಕ್ರಮ ಏರ್ಪಡಿಸಿದೆ. ಅದ್ದೂರಿ ಮೆರವಣಿಗೆಯೊಂದಿಗೆ ಆರಂಭವಾಗುವ ವೇದಿಕೆ ಕಾರ್ಯಕ್ರಮದಲ್ಲಿ ಉಪನ್ಯಾಸ, ಗೀತ ಗಾಯನ, ಸಾಂಸ್ಕøತಿಕ ಕಾರ್ಯಕ್ರಮ, ನಾಟಕ, ಸ್ವಾತಂತ್ರ್ಯ ಸೇನಾನಿಗಳಿಗೆ ಸನ್ಮಾನ ನಡೆಯಲಿದೆ ಎಂದರು.
ಕನ್ನಡ ಮತ್ತು ಸಂಸ್ಕತಿ ಇಲಾಖೆಯ ಸಹಾಯಕ ನಿರ್ದೇಶಕ ದತ್ತಪ್ಪ ಸಾಗನೂರ ಕಾರ್ಯಕ್ರಮದ ರೂಪುರೇಷೆ ವಿವರಿಸುತ್ತಾ “ಅಮೃತ ಭಾರತಿಗೆ ಕನ್ನಡದ ಆರತಿ” ಶೀರ್ಷಿಕೆಯಡಿ 4 ಹಂತಗಳಲ್ಲಿ ರಾಜ್ಯದಾದ್ಯಂತ ಕಾರ್ಯಕ್ರಮ ಆಯೋಜಿಸಿದ್ದು, ಮೊದಲನೇ ಹಂತದಲ್ಲಿ ಕಲಬುರಗಿಯ 2 ಸ್ಥಳಗಳಲ್ಲಿ ಆಯೋಜಿಸಲಾಗುತ್ತಿದೆ. ನಾಲ್ಕು ಕಂದಾಯ ವಿಭಾಗದಿಂದ 6 ರಥಗಳು ಮೆರವಣಿಗೆಯಲ್ಲಿ ಭಾಗವಹಿಸಲಿವೆ. ಕೇಂದ್ರ ಕಚೇರಿಯಿಂದಲೇ ಇಬ್ಬರು ಮುಖ್ಯ ಭಾಷಣಕಾರರು ಕಾರ್ಯಕ್ರಮಕ್ಕೆ ಆಗಮಿಸಲಿದ್ದಾರೆ ಎಂದು ತಿಳಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಭೀಮಾಶಂಕರ್ ತೆಗ್ಗಳ್ಳಿ, ರಂಗಾಯಣ ನಿರ್ದೇಶಕ ಪ್ರಭಾಕರ್ ಜೋಷಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ನವೀನ್ ಯು., ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಶಿವಶರಣಪ್ಪ ಮೂಳೆಗಾಂವ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ವಿಜಯಕುಮಾರ ತೇಗಲತಿಪ್ಪಿ ಸೇರಿದಂತೆ ಇನ್ನಿತರ ಅಧಿಕಾರಿಗಳು ಸಂಘ-ಸಂಸ್ಥೆಗಳ ಪ್ರತಿನಿಧಿಗಳು ಇದ್ದರು…

ವರದಿ. ಎಚ್ಚರಿಕೆ ಕನ್ನಡ ನ್ಯೂಸ್ ವರದಿಗಾರ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
