*ನವರಾತ್ರಿಯಲ್ಲಿ ದುರ್ಗೆಯ ಅವರತಾರಗಳು*
(ಭಕ್ತಿಮಾರ್ಗದಲಿ ಶಕ್ತಿಯ ಅವತಾರ ದರ್ಶನ)
ದಸರಾ ಎನ್ನುವ ಶಬ್ದದ ಒಂದು ವ್ಯುತ್ಪತ್ತಿಯು ದಶಹರಾ ಎಂದೂ ಇದೆ. ದಶ ಎಂದರೆ ಹತ್ತು, ಹರಾ ಎಂದರೆ ಸೋತಿವೆ. ದಸರಾದ ಮೊದಲ ಒಂಬತ್ತು ದಿನಗಳ ನವರಾತ್ರಿಗಳಲ್ಲಿ ಹತ್ತೂ ದಿಕ್ಕುಗಳು ದೇವಿಯ ಶಕ್ತಿಯಿಂದ ಸಂಪನ್ನವಾಗಿರುತ್ತವೆ ಮತ್ತು ನಿಯಂತ್ರಣಕ್ಕೊಳಪಟ್ಟಿರುತ್ತವೆ. ಅಂದರೆ ಹತ್ತೂ ದಿಕ್ಕುಗಳಲ್ಲಿನ ದಿಕ್ಪಾಲಕರು, ಗಣರು ಮುಂತಾದವರ ಮೇಲೆ ನಿಯಂತ್ರಣವಿರುತ್ತದೆ. ಹತ್ತೂ ದಿಕ್ಕುಗಳ ಮೇಲೆ ವಿಜಯವು ದೊರಕಿರುತ್ತದೆ. ಇದಕ್ಕೆ ಸಂಬಂಧಪಟ್ಟಂತೆ ಈ ದಿನಕ್ಕೆ ದಶಹರಾ, ದಸರಾ, ವಿಜಯ ದಶಮಿ ಮುಂತಾದ ಹೆಸರುಗಳಿವೆ ಹಾಗೇಯೇ ತಾಯಿಯು ಸಹ ನವ ಅವತಾರಗಳಲ್ಲಿ ರೂಪ ತಾಳುತ್ತಾಳೆ
ಪ್ರಥಮಂ ಶೈಲ ಪುತ್ರಿ
ನವರಾತ್ರಿಯ ಮೊದಲನೇ ದಿನವನ್ನು ಪ್ರತಿಪಾದ ಎಂದು ಕರೆಯುತ್ತಾರೆ.ಈ ದಿನ ಶೈಲಪುತ್ರಿಯ ರೂಪವನ್ನು ಪೂಜಿಸಲಾಗುತ್ತದೆ. ಶೈಲಪುತ್ರಿಯೆಂದರೆ ಪರ್ವತರಾಜನ ಮಗಳು ಎಂದರ್ಥ, ಈಶ್ವರನ ಪತ್ನಿಯಾಗಿಯೂ ಶೈಲ ಪುತ್ರಿಯನ್ನು ಆರಾಧಿಸಲಾಗುತ್ತದೆ.
ಶೈಲಪುತ್ರಿಯನ್ನು ಸತಿ ದೇವಿಯ ಪುನರ್ಜನ್ಮವೆಂದು ಕರೆಯಲಾಗುತ್ತದೆ. ಪತಿಯಾದ ಶಿವನನ್ನು ತಂದೆಯು ಅವಮಾನ ಮಾಡಿದ್ದಕ್ಕಾಗಿ ಸತಿ ದೇವಿಯು ತನ್ನ ತಂದೆ ಯಜ್ಞ ಮಾಡುತ್ತಿದ್ದ ವೇಳೆ ಅಗ್ನಿಕುಂಡಕ್ಕೆ ಜಿಗಿದು ಪ್ರಾಣಾರ್ಪಣೆಗೈಯುತ್ತಾಳೆ. ಶಿವನನ್ನು ಮರಳಿ ಪಡೆಯಲು ಅವಳು ಪುನರ್ಜನ್ಮ ಪಡೆಯುತ್ತಾಳೆ. ಆದರೆ ಸತಿ ಸಾವಿನ ಬಳಿಕ ಶಿವನು ದೀರ್ಘವಾದ ಧ್ಯಾನದಲ್ಲಿ ಮುಳುಗಿ ಹೋದ. ದೇವಿ ಶೈಲ ಪುತ್ರಿಯು ಕಾಡಿಗೆ ಹೋಗಿ 16ವರ್ಷ ಕಠಿಣ ತಪಸ್ಸಿನಲ್ಲಿ ತೊಡಗಿ ನಂತರ ಶಿವನನ್ನು ಪಡೆದಳು.
ಬ್ರಹ್ಮಚಾರಿಣಿ
ಎರಡನೇ ದಿನ ದೇವಿಯನ್ನು ಬ್ರಹ್ಮಚಾರಿಣಿಯ ರೂಪದಲ್ಲಿ ಪೂಜಿಸಲಾಗುತ್ತದೆ. ಪಾರ್ವತಿಯಾಗಿ ಹಿಮಾಲಯನ ಪುತ್ರಿಯಾಗಿ ಜನಿಸಿದ ದೇವಿಯು ಶಿವನನ್ನು ಪತಿಯಾಗಿ ಪಡೆಯಲು ನಾರದರ ಉಪದೇಶದಂತೆ ಕಠಿಣ ತಪಸ್ಸನ್ನು ಮಾಡುತ್ತಾಳೆ. ಬಹಳ ಕಠಿಣವಾದ ತಪಸ್ಸು ಮಾಡಿದ ಕಾರಣದಿಂದಾಗಿ ದೇವಿಗೆ ತಪಶ್ಚಾರಿಣೀ ಅರ್ಥಾತ್ ಬ್ರಹ್ಮಚಾರಿಣೀ ಎನ್ನುವ ಹೆಸರು ಬಂತು.
ಚಂದ್ರ ಘಂಟ ದೇವಿ
ನವರಾತ್ರಿಯ ಮೂರನೇ ದಿನ ಚಂದ್ರಘಂಟ ದೇವಿಯನ್ನು ಪೂಜಿಸಲಾಗುತ್ತದೆ. ದುರ್ಗಾಮಾತೆಯ ವೈವಾಹಿಕ ಅವತಾರವಾಗಿರುವ ಚಂದ್ರಘಂಟೆಯನ್ನು ದುರ್ಗಾ ಮಾತೆಯ ರೌದ್ರ ಸ್ವರೂಪವೆಂಬುದಾಗಿಯೂ ಕರೆಯಲಾಗುತ್ತದೆ.
ಹೊಸದಾಗಿ ವಿವಾಹವಾದ ಸ್ವರೂಪವನ್ನು ದುರ್ಗಾಮಾತೆಯು ಚಂದ್ರಘಂಟ ರೂಪದಲ್ಲಿ ತೋರಿಸಿದ್ದಾರೆ. ಪಾರ್ವತಿ ದೇವಿಯು ಕಠಿಣವಾದ ತಪಸ್ಸನ್ನು ಮಾಡಿ, ಶಿವನನ್ನು ಮದುವೆಯಾಗುವಲ್ಲಿ ಸಫಲರಾಗುತ್ತಾರೆ. ವಿವಾಹ ಸಂದರ್ಭದಲ್ಲಿ ಕೈಲಾಸದ ಗಣಗಳೊಂದಿಗೆ ಶಿವನು ಪಾರ್ವತಿಯ ಅರಮನೆಯನ್ನು ಪ್ರವೇಶಿಸುತ್ತಾನೆ
ಅತಿ ಭಯಂಕರನಾಗಿ ಕಾಣುತ್ತಿದ್ದ ಶಿವನನ್ನು ನೋಡಿ ಪಾರ್ವತಿ ದೇವಿಯ ತಾಯಿ ಮೂರ್ಛೆಹೋಗುತ್ತಾಳೆ. ಆಗ ಪಾರ್ವತಿಯು ಚಂದ್ರಘಂಟ ರೂಪದಲ್ಲಿ ಶಿವನ ಮುಂದೆ ಪ್ರತ್ಯಕ್ಷಳಾಗಿ ಶಿವನು ರಾಜಕುಮಾರನ ರೂಪವನ್ನು ತಾಳಬೇಕಾಗಿ ವಿನಂತಿಸಿಕೊಳ್ಳುತ್ತಾಳೆ. ಹೀಗೆ ಶಿವನು ಸುಂದರ ವರನ ರೂಪವನ್ನು ತಾಳಿದ ನಂತರ ಶಿವ ಪಾರ್ವತಿಯ ಮದುವೆ ನೆರವೇರುತ್ತದೆ.
ಕೂಷ್ಮಾಂಡ ದೇವಿ
ಚತುರ್ಥಿ ಅಥವಾ ನಾಲ್ಕನೇ ದಿನದಂದು ದೇವಿಯು ಕೂಷ್ಮಾಂಡಿನಿಯ ಅವತಾರವೆತ್ತುತ್ತಾಳೆ. ಕೂಷ್ಮಾಂಡಿನಿಯನ್ನು ಈ ಭೂಮಿಯ ಸೃಷ್ಟಿಕರ್ತೆ ಎಂದು ಹೇಳಲಾಗುತ್ತದೆ. ಎಂಟು ಭುಜಗಳಿರುವ ಕಾರಣ ಅಷ್ಟಭುಜಾದೇವಿ ಎಂದು ಕರೆಯಲಾಗುತ್ತದೆ.
ಸೃಷ್ಟಿಯ ಅಸ್ತಿತ್ವವೇ ಇಲ್ಲದಿರುವಾಗ ಎಲ್ಲೆಡೆ ಅಂಧಕಾರವೇ ಪಸರಿಸಿತ್ತು. ಆಗ ಇದೇ ದೇವಿಯು ತನ್ನ ‘ಈಶತ್’ ಹಾಸ್ಯದಿಂದ ಬ್ರಹ್ಮಾಂಡವನ್ನು ಸೃಷ್ಟಿಸುತ್ತಾಳೆ. ಆದ್ದರಿಂದ ಇವಳೇ ಸೃಷ್ಟಿಯ ಆದಿ- ಸ್ವರೂಪ ಶಕ್ತಿಯಾಗಿದ್ದಾಳೆ.
ಸ್ಕಂದ ಮಾತೆ
ನವರಾತ್ರಿಯ ಐದನೇ ದಿನದಂದು ದುರ್ಗೆಯ ಐದನೇ ಅವತಾರವಾಗಿರುವ ಸ್ಕಂದ ಮಾತೆಯನ್ನು ಪೂಜಿಸಲಾಗುತ್ತದೆ. ಸ್ಕಂದ ಎಂದರೆ ಕಾರ್ತಿಕೇಯ ಅಥವಾ ಮುರುಗನ್. ಕಾರ್ತಿಕೇಯನ ತಾಯಿಯೇ ಸ್ಕಂದ ಮಾತೆ. ಕಾರ್ತಿಕೇಯನನ್ನು ತನ್ನ ತೊಡೆಯ ಮೇಲೆ ಕೂರಿಸಿರುವ ರೂಪದಲ್ಲಿ ಈ ದೇವಿಯು ಕಾಣಿಸಿಕೊಳ್ಳುತ್ತಾಳೆ
ಕಾತ್ಯಾಯಿನಿ
ನವರಾತ್ರಿಯ ಆರನೇ ದಿನ ಕಾತ್ಯಾಯಿನಿಯನ್ನು ಆರಾಧಿಸಲಾಗುತ್ತದೆ. ಒಮ್ಮೆ ಕಾತ್ಯಾಯನ್ ಎನ್ನುವ ಋಷಿಯು ಪಾರ್ವತಿ ದೇವಿಯಂತಹ ಮಗಳನ್ನು ಪಡೆಯಬೇಕು ಎಂದು ಆಶಿಸಿ ಭಕ್ತಿಯಿಂದ ತಪಸ್ಸನ್ನು ಮಾಡುತ್ತಾನೆ. ಋಷಿಯ ಭಕ್ತಿಗೆ ಮೆಚ್ಚಿದ ದುರ್ಗಾ ಮಾತೆಯು ಆಶೀರ್ವಾದ ಮಾಡುತ್ತಾಳೆ. ಅಂತೆಯೇ ಮಗಳು ಹುಟ್ಟಿದ ಮೇಲೆ ಕಾತ್ಯಾಯಿನಿ ಎಂದು ಹೆಸರಿಟ್ಟರು. ಕಾತ್ಯಾಯಿನಿಯು ದೊಡ್ಡವಳಾದ ನಂತರ ತನ್ನ ಹತ್ತು ಕೈಗಳಲ್ಲಿ ಶಸ್ತ್ರಾಸ್ತ್ರ ಹಿಡಿದು ದುಷ್ಕೃತ್ಯ ಎಸಗುವ ರಾಕ್ಷಸರ ನಾಶ ಮಾಡಲು ಜಗತ್ತನ್ನು ಸುತ್ತಲು ಪ್ರಾರಂಭಿಸಿದಳು. ದುಷ್ಟ ರಾಕ್ಷಸರ ಸಂಹಾರಕ್ಕಾಗಿ ದುರ್ಗಾದೇವಿಯು ಅವತರಿಸಿ ಬಂದಳು ಎಂದು ಹೇಳಲಾಗುತ್ತದೆ.
ಕಾಳ ರಾತ್ರಿ
ನವರಾತ್ರಿಯ ಏಳನೇ ದಿನದಂದು ತಾಯಿ ಕಾಲರಾತ್ರಿಯನ್ನು ಪೂಜಿಸಲಾಗುವುದು. ಈ ರೂಪದಲ್ಲಿ ತಾಯಿಯು ತುಂಬಾ ರೌದ್ರಾವತಾರ ಮತ್ತು ಕಪ್ಪಾಗಿ ಕಾಣುತ್ತಾಳೆ. ಹೆಸರೇ ಹೇಳುವಂತೆ ಇದು ತಾಯಿಯ ಕರ್ಗತ್ತಲು ಮತ್ತು ಸಮಯದ ರೂಪವಾಗಿದೆ.
ರೌದ್ರಾವತಾರ ಮತ್ತು ತುಂಬಾ ಉಗ್ರ ರೂಪದಲ್ಲಿರುವ ದುರ್ಗೆಯು ಕಾಲರಾತ್ರಿಯ ರೂಪ ಧಾರಣೆ ಮಾಡಿ, ತನ್ನ ಬಂಗಾರದ ಮೈಬಣ್ಣದ ಚರ್ಮವನ್ನು ಕಿತ್ತು ರಾಕ್ಷಸರ ವಿರುದ್ಧ ಹೋರಾಡಲು ಹೋಗುತ್ತಾಳೆ. ಕಾಳರಾತ್ರಿಯು ಎಲ್ಲಾ ರೀತಿಯ ದುಷ್ಟಶಕ್ತಿ, ದುಷ್ಟತೆ ಮತ್ತು ನಕಾರಾತ್ಮಕ ಶಕ್ತಿ ಹಾಗೂ ಭೀತಿ ದೂರ ಮಾಡುತ್ತಾಳೆ. ಕಾಲರಾತ್ರಿಯು ತನ್ನ ಭಕ್ತರಿಗೆ ಹೆಚ್ಚಿನ ಸಂತೋಷ ಹಾಗೂ ತೃಪ್ತಿ ಕರುಣಿಸುವುದರಿಂದಾಗಿ ಆಕೆಯನ್ನು ಶುಭಾಂಕರಿ ಅಥವಾ ಪವಿತ್ರವೆಂದು ಪರಿಗಣಿಸಲಾಗಿದೆ
ಮಹಾ ಗೌರಿ
ನವರಾತ್ರಿಯ ಎಂಟನೇ ದಿನದಂದು ಮಹಾಗೌರಿ ದೇವಿಯನ್ನು ಪೂಜಿಸಲಾಗುತ್ತದೆ. ಮಹಾಗೌರಿಯು ತನ್ನ 16ನೇ ವಯಸ್ಸಿನ ಯೌವ್ವನೆಯಾಗಿ ಕಾಣಿಸಿಕೊಳ್ಳುತ್ತಾಳೆ. ಗೌರಿ ಎಂದರೆ ಆಕೆಯು ಗಿರಿ ಅಥವಾ ಪರ್ವತದ ಮಗಳೆಂದು ಹೇಳಲಾಗುತ್ತದೆ. ಗೂಳಿ ಮೇಲೆ ಪ್ರಯಾಣಿಸುವ ಗೌರಿ ತನ್ನ ಕೈಯಲ್ಲಿ ತ್ರಿಶೂಲದೊಂದಿಗೆ ಢಮರುವನ್ನು ಹಿಡಿಕೊಂಡಿರುತ್ತಾಳೆ.
ತಾಯಿ ದುರ್ಗೆಯು ಭೂಮಿಯ ಮೇಲೆ ಜನ್ಮವನ್ನು ಪಡೆದು, ಮರಳಿ ದೇವಲೋಕಕ್ಕೆ ಹೋಗಿ ಶಿವನನ್ನು ಮದುವೆಯಾಗಲು ಬಯಸುತ್ತಾಳೆ. ನಾರದರ ಸಲಹೆಯಂತೆ ಶಿವನನ್ನು ಒಲಿಸಿಕೊಳ್ಳಲು ತಪಸ್ಸು ಮಾಡುತ್ತಾಳೆ. ಆಕೆ ಸಂಪೂರ್ಣವಾಗಿ ತಪಸ್ಸಿನಲ್ಲಿ ಮಗ್ನವಾಗಿ ಆಹಾರ, ನೀರನ್ನು ತ್ಯಜಿಸಿರುವ ಸಮಯದಲ್ಲಿ ಆಕೆಯ ದೇಹದಲ್ಲಿ ಧೂಳು, ಕೊಳೆ ತುಂಬಿಕೊಳ್ಳುತ್ತದೆ. ಬಿಸಿಲಿನಿಂದಾಗಿ ಆಕೆಯ ದೇಹವು ಸಂಪೂರ್ಣವಾಗಿ ಕಪ್ಪಾಗುತ್ತದೆ. ಸಾಔಇರಾರು ವರ್ಷಗಳ ತಪಸ್ಸಿನ ನಂತರ ಶಿವನು ಆಕೆಯಿಂದ ಪ್ರಭಾವಿತನಾಗಿ ಆಕೆಯ ದೇಹವನ್ನು ಹೊಳೆಯುವಂತೆ ಮಾಡಲು ಗಂಗೆಯನ್ನು ಹರಿಯಲು ಬಿಡುತ್ತಾನೆ. ಇದರಿಂದಾಗಿ ಗೌರಿಯು ಕಾಂತಿಯುತವಾಗಿ, ಶ್ವೇತವರ್ಣದಲ್ಲಿ ಧ್ಯಾನಾಸಕ್ತಳಾಗಿ ಕಾಣುತ್ತಾಳೆ.
ಸಿದ್ಧಿಧಾತ್ರಿ
ನವಮಿಯಂದು ದುರ್ಗೆಯು ಒಂಭತ್ತನೇ ಅವತಾರವಾದ ಸಿದ್ಧಿಧಾತ್ರಿಯ ರೂಪದಲ್ಲಿರುತ್ತಾಳೆ. ಸಿದ್ಧಿಧಾತ್ರಿ ದೇವಿಯು ತ್ರಿಮೂರ್ತಿಗಳಾಗಿರುವ ಬ್ರಹ್ಮ, ವಿಷ್ಣು, ಮಹೇಶ್ವರರಿಗೆ ಆಧ್ಯಾತ್ಮಿಕ ವೈಭವ ಹಾಗೂ ಪರಿಪೂರ್ಣತೆ ನೀಡುತ್ತಾಳೆ. ಅಷ್ಟ ಮಹಾಸಿದ್ಧಿಯನ್ನು ನಿರ್ಮಿಸಿ ಅದನ್ನು ತ್ರಿಮೂರ್ತಿಗಳಿಗೆ ನೀಡುತ್ತಾಳೆ. ತಾಯಿ ಸಿದ್ಧಿಧಾತ್ರಿಯು ಪರಿಪೂರ್ಣತೆ, ಎಲ್ಲಾ ರೀತಿಯ ಶಕ್ತಿ, ವೈಭವ ಮತ್ತು ಮಹಿಮೆಯ ಮೂಲ.
ಹೀಗೆ ನವರಾತ್ರಿಯ ಒಂಭತ್ತೂ ದಿನಗಳಲ್ಲಿ ನವದುರ್ಗೆಯರನ್ನು ಸ್ಥಾಪಿಸಿ ಪೂಜಿಸಲಾಗುತ್ತದೆ. ಜಗತ್ತಿನಲ್ಲಿ ಯಾವಾಗ ತಾಮಸಿಕ, ಅಸುರೀ ಮತ್ತು ಕ್ರೂರ ಜನರು ಪ್ರಬಲರಾಗಿ ಸಾತ್ತ್ವಿಕ ಮತ್ತು ಧರ್ಮನಿಷ್ಠ ಸಜ್ಜನರನ್ನು ಪೀಡಿಸುತ್ತಾರೆಯೋ, ಆಗ ದೇವಿಯು ಧರ್ಮಸಂಸ್ಥಾಪನೆಗಾಗಿ ಪುನಃ ಪುನಃ ಅವತಾರ ತಾಳುತ್ತಾಳೆ ಎನ್ನಲಾಗುತ್ತದೆ.
ನವರಾತ್ರಿ ತಾಯೇ ದುರ್ಗೇಯ ಉಪಾಸನೆ ಮಾಡಿ ಕೃಪೆಗೆ ಪಾತ್ರರಾಗಿ ಸರ್ವರಿಗೂ ಮಂಗಲವಾಗಲಿ.
ಸಂಗ್ರಹ
*ಕಾರ್ತಿಕ ಆಚಾರ್ಯ ಎಂ.ಕಲ್ಲಹಳ್ಳಿ*
ವಿಜಯನಗರ
ಯುವ ಆಧ್ಯಾತ್ಮಿಕ ಚಿಂಕರು, ಸಾಹಿತಿ…

ವರದಿ. ಪ್ರಕಾಶ್. ಇಟ್ಟಿಗಿ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
