ಕಲಬುರಗಿ ಜಿಲ್ಲೆಯ ಶಹಬಾದ್ ಇಎಸ್ಐ ಆಸ್ಪತ್ರೆ ಪುನಶ್ಚೇತನಕ್ಕೆ ಕ್ರಮ: ಸಚಿವ ನಿರಾಣಿ
ಆಸ್ಪತ್ರೆಗೆ ಆಧುನಿಕ ಸ್ಪರ್ಶ ನೀಡಲು ನಿರ್ಧಾರ
ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ಜತೆ ಮಹತ್ವದ ಸಭೆ
: ಮೂಲ ಸೌಕರ್ಯಗಳಿಲ್ಲದ ಕಲಬುರಗಿ ಜಿಲ್ಲೆಯ ಶಹಬಾದ್ ಪಟ್ಟಣದ ಇಎಸ್ಐ ಆಸ್ಪತ್ರೆಯನ್ನು ಪುನಶ್ಚೇತನಗೊಳಿಸಲು ತಕ್ಷಣವೇ ಕ್ರಿಯಾಯೋಜನೆ ರೂಪಿಸಬೇಕೆಂದು ಜಿಲ್ಲಾ ಉಸ್ತುವಾರಿ ಹಾಗೂ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ ಆರ್ ನಿರಾಣಿ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ವಿಧಾನಸೌಧದ ತಮ್ಮ ಕಚೇರಿಯಲ್ಲಿ ಬುಧವಾರ ಸಭೆ ನಡೆಸಿದ ಸಚಿವ ನಿರಾಣಿ, ಶಹಬಾದ್ನ ಇಎಸ್ಐ ಆಸ್ಪತ್ರೆಯನ್ನು ಪುನಶ್ಚೇತನಗೊಳಿಸಲು ಕ್ರಿಯಾ ಯೋಜನೆ ಸಿದ್ದಪಡಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಈ ಸಂದರ್ಭದಲ್ಲಿ ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್, ರಾಜ್ಯ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಿ.ಕಲ್ಪನಾ, ಕಾರ್ಮಿಕ ಇಲಾಖೆಯ ಆಯುಕ್ತ ಅಕ್ರಂ ಪಾಷ ಸೇರಿದಂತೆ ಮತ್ತಿತರ ಅಧಿಕಾರಿಗಳು ಇದ್ದರು.
“ಶಹಬಾದ್ ಪಟ್ಟಣದ ವಾಡಿ ರಸ್ತೆಯಲ್ಲಿರುವ ಶಿಥಿಲಾವಸ್ಥೆಯಲ್ಲಿರುವ ಇಎಸ್ಐ ಆಸ್ಪತೆಯನ್ನು ಆಧುನಿಕ ಸೌಲಭ್ಯ ಕಲ್ಪಿಸಿ ಸಾರ್ವಜನಿಕರ ಸೇವೆಗೆ ಸಮರ್ಪಿಸಬೇಕು. ಈ ಹಿನ್ನೆಲೆಯಲ್ಲಿ ಅಧಿಕಾರಿಗಳು ತಕ್ಷಣವೇ ಕಾರ್ಯೋನ್ಮುಖರಾಗಬೇಕು,” ಎಂದು ನಿರಾಣಿ ಹೇಳಿದರು.
ಕೊವಿಡ್ ಎರಡನೇ ಅಲೆ ಸಂದರ್ಭದಲ್ಲಿ ಎರಡು ಬಾರಿ ಆಸ್ಪತ್ರೆಗೆ ಭೇಟಿ ನೀಡಿದ್ದ ಸಚಿವ ನಿರಾಣಿ, ಅಲ್ಲಿನ ವಸ್ತುಸ್ಥಿತಿ ಪರಿಶೀಲಿಸಿ ಆಸ್ಪತ್ರೆ ಕಟ್ಟಡದ ಪುನಶ್ಚೇತನಕ್ಕೆ ಸಲಹೆ ನೀಡಿದ್ದರು.
“ಆಸ್ಪತ್ರೆ ಆವರಣದಲ್ಲಿ ಬೆಳೆದಿರು ಗಿಡ-ಗಂಟೆಗಳು, ಬಿರುಕು ಬಿಟ್ಟಿರುವ ಗೋಡೆಗಳು, ಕೈಕೊಟ್ಟಿರುವ ವಿದ್ಯುತ್ ಸಂಪರ್ಕ, ಹಾಳಾಗಿರುವ ಬೆಡ್ಗಳು, ಚಿಕಿತ್ಸಾ ಕೊಠಡಿ, ರೋಗಿಗಳು ತಂಗುವ ಕೊಠಡಿಗಳು, ಶೌಚಾಲಯ, ಅಡುಗೆ ಮನೆ, ಸ್ನಾನದ ಕೋಣೆ ಸೇರಿದಂತೆ ಎಲ್ಲ ರೀತಿಯ ಸವಲತ್ತು ಕಲ್ಪಿಸಬೇಕು,” ಎಂದು ಸಚಿವರು ಸೂಚಿಸಿದರು.
“ಈ ಆಸ್ಪತ್ರೆಯು ಪುನಶ್ಚೇತನಗೊಂಡರೆ ಸಾವಿರಾರು ಜನರಿಗೆ ಆರೋಗ್ಯ ಸೌಲಭ್ಯ ಸಿಗಲಿದೆ. ಪಾಳು ಬಿದ್ದಿರುವ ಆಸ್ಪತ್ರೆಗೆ ಆಧುನಿಕ ಸ್ಪರ್ಶ ನೀಡಬೇಕು. ಸರ್ಕಾರದ ವತಿಯಿಂದ ಎಲ್ಲ ರೀತಿಯ ಆರ್ಥಿಕ ನೆರವು ನೀಡಲಾಗುವುದು. ಇದು ಜಿಲ್ಲೆಯ ಜನತೆಯ ಬಹುದಿನಗಳ ಬೇಡಿಕೆಯಾಗಿರುವುದರಿಂದ ಎಷ್ಟು ಸಾಧ್ಯವೋ ಅಷ್ಟು ಬೇಗ ಕೆಲಸ ಆರಂಭವಾಗಲಿ,” ಎಂದು ನಿರಾಣಿ ಸೂಚಿಸಿದರು.
ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ಮಾತನಾಡಿ, “ಐಎಸ್ಐ ಆಸ್ಪತ್ರೆಗಳು ಕೇಂದ್ರ ಕಾರ್ಮಿಕ ಇಲಾಖೆಯ ವ್ಯಾಪ್ತಿಗೆ ಬರುವುದರಿಂದ ಇಲಾಖೆಯ ಮುಖ್ಯಸ್ಥರೊಂದಿಗೆ ಸಮಾಲೋಚನೆ ನಡೆಸಲಾಗುವುದು. ಜತೆಗೆ ನಮ್ಮ ಇಲಾಖೆಯಿಂದ ಆರ್ಥಿಕ ನೆರವು ಸೇರಿದಂತೆ ಎಲ್ಲ ಅಗತ್ಯ ಸಹಕಾರ ನೀಡಲು ಸಿದ್ದರಿದ್ದೇವೆ,” ಎಂದರು.
*ಆಸ್ಪತ್ರೆಯ ಹಿನ್ನೆಲೆ* :
1994ರಲ್ಲಿ ಶಹಬಾದ್ ಪಟ್ಟಣದಲ್ಲಿ ಕಾರ್ಮಿಕರಿಗಾಗಿ ಇಎಸ್ಐ ಆಸ್ಪತ್ರೆ ನಿರ್ಮಾಣ ಮಾಡಲಾಗಿತ್ತು. ಪ್ರಾರಂಭದಲ್ಲಿ ಈ ಆಸ್ಪತ್ರೆ ಸೇವೆಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಜಿಲ್ಲೆಯ ನಾನಾ ಭಾಗಗಳಿಂದ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ಕಾರ್ಮಿಕರು, ಜನಸಾಮಾನ್ಯರು ಆಸ್ಪತ್ರೆಗೆ ಬಂದು ಚಿಕಿತ್ಸೆ ಪಡೆಯುತ್ತಿದ್ದರು. ನುರಿತ ವೈದ್ಯರು ಉತ್ತಮ ಚಿಕಿತ್ಸೆ ಕೊಡುತ್ತಿದ್ದರಿಂದ ಇದೊಂದು ಉತ್ತಮ ಇಎಸ್ಐ ಆಸ್ಪತ್ರೆ ಎಂಬ ಹೆಗ್ಗಳಿಕೆಗೂ ಪಾತ್ರವಾಗಿತ್ತು. ಆಸ್ಪತ್ರೆ ಸುತ್ತಮುತ್ತ ಸಿಮೆಂಟ್ ಫ್ಯಾಕ್ಟರಿಗಳು ಇದ್ದವು. ಕಾಲಕ್ರಮೇಣ ಈ ಕಾರ್ಖಾನೆಗಳು ಮಹಾರಾಷ್ಟ್ರ, ಆಂಧ್ರ ಪ್ರದೇಶ, ತೆಲಂಗಾಣ ರಾಜ್ಯಗಳಿಗೆ ಸ್ಥಳಾಂತರಗೊಂಡ ಹಿನ್ನೆಲೆಯಲ್ಲಿ ರೋಗಿಗಳ ಸಂಖ್ಯೆ ಕ್ಷೀಣಿಸಿತು. ಇದರಿಂದ ಆಸ್ಪತ್ರೆ ಮುಚ್ಚುವ ಹಂತಕ್ಕೆ ಬಂತು. ಈಗ ಪಾಳು ಬಿದ್ದಿರುವ ಆಸ್ಪತ್ರೆಗೆ ಆಧುನಿಕ ಸ್ಪರ್ಶ ನೀಡಲು ಸಚಿವ ನಿರಾಣಿ ಮುಂದಾಗಿರುವುದು ಆಶಾದಾಯಕ ಬೆಳವಣಿಗೆಯಾಗಿದೆ…

ವರದಿ. ಬಸವರಾಜ್, ಹಿರೇಮಠ್, ಕಲಬುರ್ಗಿ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
