ಮಹಿಳೆಯರ ಹೈಟೆಕ್ ಹಾಸ್ಟಲ್ ಕಟ್ಟಡ ನಿರ್ಮಾಣದ ಶಂಕುಸ್ಥಾಪನಾ ಸಮಾರಂಭ
ಮಕ್ಕಳ ವಿದ್ಯಾಭ್ಯಾಸಕ್ಕೆ ಒತ್ತು ನೀಡಿ: ಡಾ|| ಜಿ.ಎಂ ಸಿದ್ದೇಶ್ವರ
ದಾವಣಗೆರೆ..ಅಲ್ಪಸಂಖ್ಯಾತರ ಮಕ್ಕಳು ವಿದ್ಯಾಭ್ಯಾಸದಿಂದ ಹಿಂದುಳಿಯುತ್ತಿದ್ದಾರೆ, ಪೋಷಕರು ತಮ್ಮ ಮಕ್ಕಳ ವಿದ್ಯಾಭ್ಯಾಸಕ್ಕೆ ಹೆಚ್ಚಿನ ಒತ್ತು ನೀಡಬೇಕು ಎಂದು ಸಂಸದ ಡಾ.ಜಿ.ಎಂ ಸಿದ್ದೇಶ್ವರ ಹೇಳಿದರು
ಸೋಮವಾರ ನಗರದ ಕೆ.ಟಿ.ಜೆ ನಗರದಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಮತ್ತು ವಕ್ಫ ಇಲಾಖೆ ಹಾಗೂ ಮಸ್ಜಿದ್-ಎ-ಖಿಜ್ರಿಯಾ ಸಮಿತಿಯ ಸಂಯುಕ್ತಾಶ್ರಯದಲ್ಲಿ ಪಿಎಂಜೆವಿಕೆ ಯೋಜನೆಯಡಿಯಲ್ಲಿ ನಿರ್ಮಿಸುತ್ತಿರುವ ಮಹಿಳೆಯರ ಹೈಟೆಕ್ ಹಾಸ್ಟಲ್ ಕಟ್ಟಡ ನಿರ್ಮಾಣದ ಶಂಕುಸ್ಥಾಪನಾ ಸಮಾರಂಭದಲ್ಲಿ ಅವರು ಮಾತನಾಡಿದರು
ಸರ್ಕಾರ ವಿಶೇಷವಾಗಿ ಅಲ್ಪಸಂಖ್ಯಾತರ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಸಾವಿರಾರು ಕೋಟಿ ವೆಚ್ಚದಲ್ಲಿ ಅಭಿವೃದ್ಧಿ ಕೆಲಸಗಳನ್ನು ಮಾಡುತ್ತಿದೆ. ವಿದ್ಯಾಸಿರಿ ಯೋಜನೆಯಲ್ಲಿ ವಿದ್ಯಾರ್ಥಿಗಳಿಗೆ ನೇರವಾಗಿ ಅವರ ಖಾತೆಗೆ ಸ್ಕಾಲರ್ಶಿಪ್ ನೀಡಿ, ಸಮಾಜದಲ್ಲಿ ಸಮತೋಲನ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗುತ್ತಿದೆ.
ಕೇಂದ್ರ ಸರ್ಕಾರದ ಪ್ರಧಾನಮಂತ್ರಿಗಳ ಜನ ವಿಕಾಸ ಕಾರ್ಯಕ್ರಮ ಯೋಜನೆಯಡಿಯಲ್ಲಿ ರೂ. 12.40 ಕೋಟಿ ವೆಚ್ಚಗಳಲ್ಲಿ ಮಹಿಳೆಯರ ಹೈಟೆಕ್ ಹಾಸ್ಟೆಲ್ ಕಟ್ಟಡ ನಿರ್ಮಾಣ ಮಾಡಲಾಗುತ್ತಿದ್ದು, ದಾವಣಗೆರೆ ಜಿಲ್ಲೆಗೆ ಒಟ್ಟು ರೂ. 52 ಕೋಟಿ ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಹೇಳಿದರು.

ಶಾಸಕ ಎಸ್.ಎ ರವೀಂದ್ರನಾಥ್ ಮಾತನಾಡಿ, ನೂತನವಾಗಿ ಶಂಕುಸ್ಥಾಪನೆ ಗೊಂಡ ಮಹಿಳೆಯರ ಹೈಟೆಕ್ ವಸತಿ ನಿಲಯ ಕಟ್ಟಡ ನಿರ್ಮಾಣ ಪೂರ್ಣಗೊಂಡ ನಂತರ ಹಳ್ಳಿಯಿಂದ ಬರುವ ಮಕ್ಕಳಿಗೆ ಮೊದಲ ಆದ್ಯತೆ ನೀಡಬೇಕು, ಕಟ್ಟಡವನ್ನು ಅಚ್ಚುಕಟ್ಟಾಗಿ ನಿರ್ಮಿಸಿ ಇನ್ನು ಒಂದು ವರ್ಷದಲ್ಲಿ ಕಾಮಗಾರಿ ಮುಕ್ತಗೊಳಿಸಬೇಕು ಎಂದು ಹೇಳಿದರು.
ಮುಸ್ಲಿಂ ಮುಖಂಡ ಸೈಯದ್ ಸೈಫುಲ್ಲಾ ಮಾತನಾಡಿ, ಒಂದು ಹೆಣ್ಣು ಮಗು ಶಿಕ್ಷಣ ಕಲಿತರೆ ಇಡೀ ಕುಟುಂಬವೇ ಶಿಕ್ಷಣ ಕಲಿತಂತೆ, ಸರಕಾರ ಹೆಣ್ಣುಮಕ್ಕಳ ಶಿಕ್ಷಣಕ್ಕೆ ಸಾಕಷ್ಟು ಯೋಜನೆಗಳನ್ನು ರೂಪಿಸುತ್ತಿದೆ. ನಗರದಲ್ಲಿ ಪಿಎಂಜೆವಿಕೆ ಯೋಜನೆಯಡಿಯಲ್ಲಿ ಮಹಿಳೆಯರ ಹಾಸ್ಟೆಲ್ ನಿರ್ಮಾಣ ಮಾಡುತ್ತಿರುವುದು ಸಂತೋಷದ ವಿಷಯ, ನಾವೆಲ್ಲರೂ ಅದಕ್ಕೆ ಕೈಜೋಡಿಸಿ ನಮ್ಮ ಮಕ್ಕಳನ್ನು ಶಿಕ್ಷಣವಂತರಾಗಿ ಮಾಡಬೇಕು ಎಂದರು.
ಮಹಾನಗರ ಪಾಲಿಕೆ ಸದಸ್ಯ ಅಬ್ದುಲ್ ಲತೀಫ್ ಮಾತನಾಡಿ, ಕೆಟಿಜೆ ನಗರದ ಭಾಗದಲ್ಲಿ ಒಳ್ಳೆ ಅಭಿವೃದ್ಧಿ ಕೆಲಸಗಳು ಆಗುತ್ತಿವೆ. ದಾವಣಗೆರೆಯ ಮಧ್ಯಭಾಗದಲ್ಲಿ ಹೈಟೆಕ್ ಹಾಸ್ಟೆಲ್ ನಿರ್ಮಾಣವಾಗುತ್ತಿದ್ದು, ಇದರಿಂದ ದೂರದಿಂದ ಬರುವ ಹಳ್ಳಿ ಮಕ್ಕಳಿಗೆ ಅನುಕೂಲವಾಗಲಿದೆ ಇಂತಹ ಮಹತ್ವದ ಕಾರ್ಯಕ್ಕೆ ಎಲ್ಲರೂ ಕೈಜೋಡಿಸಬೇಕು ಎಂದರು.
ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆಯ ಮೇಯರ್ ಜಯಮ್ಮ ಗೋಪಿನಾಯ್ಕ್, ಉಪಮೇಯರ್ ಗಾಯತ್ರಿ ಬಾಯಿ, ದೂಡಾ ಅಧ್ಯಕ್ಷ ಕೆ.ಎಂ ಸುರೇಶ್, ಕೆಎಂಡಿಸಿ ನಿರ್ದೇಶಕ ಗೌತಮ್ ಜೈನ್, ರಾಜ್ಯ ಯೋಜನಾ ಆಯೋಗದ ಸದಸ್ಯ ಡಾ.ಸಿ.ಆರ್ ನಸೀರ್ ಅಹ್ಮದ್, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಅಮಿತ್ ಬಿದರಿ, ಮಾಜಿ ದೂಡಾ ಅಧ್ಯಕ್ಷ ಯಶವಂತರಾವ್ ಜಾದವ್, ಮಹಾನಗರ ಪಾಲಿಕೆಯ ಸದಸ್ಯ ಜೆ.ಎನ್ ಶ್ರೀನಿವಾಸ್, ಸೇರಿದಂತೆ ಇತರರು ಉಪಸ್ಥಿತರಿದ್ದರು…

ವರದಿ. ಶಶಿಕುಮಾರ್, ಜೆ, ಸಿ,
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
