ಸರ್ಕಾರ ಬಡವರಿಗೆ ಸಹಕಾರವಾಗುವಂತಹ ಕಾರ್ಯಕ್ರಮ ನೀಡಬೇಕು: ಮಧು ಬಂಗಾರಪ್ಪ
ಸರ್ಕಾರ ಬಡವರಿಗೆ ಸಹಕಾರವಾಗುವ ರೀತಿ ಶಕ್ತಿ, ಗೃಹ ಜ್ಯೋತಿ ಸೇರಿದಂತೆ ಇನ್ನಿತರ ಯೋಜನೆಗಳನ್ನು ರೂಪಿಸಿ ಅನುಷ್ಠಾನಗೊಳಿಸುತ್ತಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯ ಸಚಿವರಾದ ಮಧು ಬಂಗಾರಪ್ಪ ಅವರು ತಿಳಿಸಿದರು.
ಅವರು ಇಂದು ಹೊಸಹಳ್ಳಿಯ ಸರ್ಕಾರಿ ಪ್ರೌಢಶಾಲಾಯಲ್ಲಿ ಕರ್ನಾಟಕ ಸರ್ಕಾರದ ನೂತನ ಕಾರ್ಯಕ್ರಮವಾದ ಮಧ್ಯಾಹ್ನ ಉಪಹಾರ ಯೋಜನೆಯಡಿ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿನ 1 ರಿಂದ 10ನೇ ತರಗತಿಯ ಎಲ್ಲಾ ವಿದ್ಯಾರ್ಥಿಗಳಿಗೆ ಪೂರಕ ಪೋಷಣ ಪೌಷ್ಠಿಕ ಆಹಾರದ(ಮೊಟ್ಟೆ, ಚಿಕ್ಕಿ, ಬಾಳೆಹಣ್ಣು) ವಿತರಣೆಯ ರಾಜ್ಯ ಮಟ್ಟದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಮೊದಲು ಸರ್ಕಾರಿ ಶಾಲೆಯ 1 ರಿಂದ 8 ನೇ ತರಗತಿಯವರೆಗಿನ ಮಕ್ಕಳಿಗೆ ವಾರಕ್ಕೊಮ್ಮೆ ನೀಡಲಾಗುತ್ತಿತ್ತು. 8 ನೇ ಮತ್ತು 9 ನೇ ತರಗತಿಯ ಮಕ್ಕಳು ಒಟ್ಟಿಗೆ ಕುಳಿತು ಊಟ ಮಾಡುವ ಸಂದರ್ಭದಲ್ಲಿ 8 ನೇ ತರಗತಿಯ ಮಕ್ಕಳಿಗೆ ಮಾತ್ರ ಮೊಟ್ಟೆ ನೀಡುವುದು ಶಿಕ್ಷಕರಿಗೆ ಹಾಗೂ ಸೇವಿಸುವ ಮಕ್ಕಳಿಗೂ ಕಷ್ಟಕರವಾಗಿತ್ತು. ಈ ವಿಷಯವನ್ನು ಮಾನ್ಯ ಮುಖ್ಯಮಂತ್ರಿಗಳ ಗಮನಕ್ಕೆ ತಂದ ತಕ್ಷಣ ಮುಖ್ಯಮಂತ್ರಿಗಳು 1 ರಿಂದ 10 ನೇ ತರಗತಿಯ ಎಲ್ಲಾ ಮಕ್ಕಳಿಗೆ ವಾರಕ್ಕೆ ಎರಡು ಮೊಟ್ಟೆಯನ್ನು ನೀಡುವಂತೆ ತಿಳಿಸಿದರು.
ಸರ್ಕಾರಿ ಮತ್ತು ಅನುದಾನಿತ ಶಾಲೆಗಳ 60 ಲಕ್ಷ ಮಕ್ಕಳಿಗೆ ವಾರದಲ್ಲಿ ಎರಡು ಬಾರಿ 1,20,000 ಮೊಟ್ಟೆ ನೀಡಲಾಗುವುದು.ಇದರಿಂದ ಮಕ್ಕಳಲ್ಲಿ ಪೌಷ್ಟಿಕಾಂಶ ಹೆಚ್ಚಾಗಿ ಉತ್ತಮ ಮಾನಸಿಕ ಹಾಗೂ ದೈಹಿಕ ಬೆಳವಣಿಗೆ ಕಾಣಬಹುದು ಎಂದರು.
ಮುಂದಿನ ಎರಡು ವರ್ಷಗಳಲ್ಲಿ ಮಕ್ಕಳಿಗೆ ನೀಡುವ
ಶಿಕ್ಷಣವನ್ನು ಮಕ್ಕಳಿಗೆ ಪೂರಕವಾಗಿ ಹಾಗೂ ಮಕ್ಕಳ ಭವಿಷ್ಯ ರೂಪಿಸುವ ರೀತಿ ಮಾಡಲಾಗುವುದು. ಶಿಕ್ಷಣ ಇಲಾಖೆಗೆ ವರ್ಗಾವಣೆ ಕೋರಿ ಅಂದಾಜು 90000 ಅರ್ಜಿಗಳು ಬಂದಿತ್ತು. 31000 ಶಿಕ್ಷಕರನ್ನು ಕೌನ್ಸಿಲಿಂಗ್ ಮೂಲಕ ವರ್ಗಾವಣೆ ಮಾಡಲಾಗಿದೆ ಎಂದರು.
ಈಗಾಗಲೇ ಸರ್ಕಾರದ ವತಿಯಿಂದ 30000 ಅತಿಥಿ ಶಿಕ್ಷಕರನ್ನು ಪಡೆಯಲಾಗಿದೆ. ಮಾನ್ಯ ಮುಖ್ಯಮಂತ್ರಿಗಳು ಶಾಲೆಗಳಲ್ಲಿ ಶಿಕ್ಷಕರ ಕೊರತೆ ಉಂಟಾಗಬಾರದು ಎಂದು ಇನ್ನೂ 10000 ಅತಿಥಿ ಶಿಕ್ಷಕರನ್ನು ಪಡೆಯಲು ತಿಳಿಸಿದ್ದಾರೆ. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳನೊಳಗೊಂತೆ ಸಭೆ ನಡೆಸಿ ಶಿಕ್ಷಣ ಇಲಾಖೆಯಲ್ಲಿರುವ ಸಮಸ್ಯೆಗಳನ್ನು ಪರಿಹರಿಸಲಾಗುವುದು ಎಂದರು.
ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಅವರು ಮಾತನಾಡಿ
ಗ್ರಾಮೀಣ ಮತ್ತು ಬಡ ಮಕ್ಕಳಿಗೆ ಪೌಷ್ಟಿಕ ಆಹಾರ ನೀಡುವ ದೃಷ್ಠಿಯಿಂದ ಸರ್ಕಾರಿ ಹಾಗೂ ಅನುದಾನಿತ ಶಾಲಾ ಮಕ್ಕಳಿಗೆ ಮೊಟ್ಟೆ ನೀಡಲಾಗುತ್ತಿದೆ. ಆರ್ಥಿಕವಾಗಿ ಹಿಂದುಳಿದವರು, ಮಹಿಳೆಯರು ಹಾಗೂ ರೈತರಿಗೆ ಪೂರಕವಾದ ಯೋಜನೆಗಳನ್ನು ರೂಪಿಸಿ ಅನುಷ್ಠಾನ ಗೊಳಿಸಲಾಗುತ್ತಿದೆ. ಇದಕ್ಕೆ ಸಾರ್ವಜನಿಕರ ಮುಂದೆ ಇರುವ ಗೃಹ ಜ್ಯೋತಿ, ಶಕ್ತಿ, ಗೃಹ ಲಕ್ಷ್ಮಿ ಹಾಗೂ ಅನ್ನ ಭಾಗ್ಯ ಯೋಜನೆಗಳೇ ಉದಾಹರಣೆ. ಗೃಹ ಲಕ್ಷ್ಮಿ ಯೋಜನೆಗೆ ಆಗಸ್ಟ್ 30 ರಂದು ಚಾಲನೆ ನೀಡಲಾಗುವುದು ಎಂದರು…

ವರದಿ, ಸುರೇಶ್ ಮಂಡ್ಯ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
